ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ದಿಢೀರನೆ ಭಾರಿ ಹೆಚ್ಚಳವಾಗಿದೆ. ಇದು ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.
ಲಾಕ್ ಡೌನ್ ನಿರ್ಬಂಧ ಸಡಿಲಿಕೆ ನೆಪದಲ್ಲಿ ಹಾಗೂ ಆರ್ಥಿಕ ಸುಸ್ಥಿರತೆ ಸಾಧಿಸುವ ನಿಟ್ಟಿನಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಯಿತು. ಹೀಗಾಗಿ ಮನೆಯಲ್ಲಿದ್ದ ಪಾನಪ್ರಿಯರೆಲ್ಲ ಬೀದಿಗೆ ಬಂದರು. ಸಾಮಾಜಿಕ ಅಂತರ ಮರೆತರು.
ಇನ್ನು, ವಲಸೆ ಕಾರ್ಮಿಕರ ವಿಷಯದಲ್ಲಿ ಸರ್ಕಾರ ಎಡವಿತಾ ಎಂಬ ವಿಚಾರ ತೀವ್ರ ಚರ್ಚೆಗೆ ಕಾರಣವಾಗಿದೆ. ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳದೆ ಲಕ್ಷಾಂತರ ಕಾರ್ಮಿಕರ ಪ್ರವಾಸಕ್ಕೆ ಅವಕಾಶ ಕಲ್ಪಿಸಲಾಯಿತು ಎಂಬ ಆರೋಪ ಕೇಳಿ ಬಂದಿದೆ. ಇದರಿಂದಾಗಿ ಜಿಲ್ಲಾ ಕೇಂದ್ರಗಳಲ್ಲಿ ಕೊರೋನಾ ವ್ಯಾಪಕವಾಗಿ ಹರಡುತ್ತಿದೆ ಎಂದು ಹೇಳಲಾಗುತ್ತಿದೆ.
ಲಾಕ್ ಡೌನ್ ನಿಯಮ ಸಡಿಲಿಕೆಯಿಂದಾಗಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಓಡಾಟ ನಡೆಸುತ್ತಿದ್ದಾರೆ. ಅನಗತ್ಯ ಕಾರ್ಯಗಳಿಗೆ ರಸ್ತೆಗಿಳಿಯುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದಾಗಿ ಸಾಮಾಜಿಕ ಅಂತರ ಎಂಬ ಪದಕ್ಕೆ ಹಲವೆಡೆ ಅರ್ಥವೇ ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ಕಂಟೇನ್ ಮೆಂಟ್ ವಲಯಗಳಲ್ಲಿ ಜನರ ಸಂಚಾರಕ್ಕೆ ಕಠಿಣ ನಿರ್ಬಂಧ ವಿಧಿಸಲು ವಿಫಲವಾಗಿರುವುದು ಕೂಡ ರೋಗ ವ್ಯಾಪಕವಾಗಿ ಹರಡಲು ಕಾರಣವಾಯಿತು ಎಂಬ ಮಾತು ಕೇಳಿಬರುತ್ತಿದೆ.