newsics.com
ಬೆಂಗಳೂರು: ದಕ್ಷಿಣ ಆಫ್ರಿಕಾದಿಂದ ಬಂದಿರುವ ಇಬ್ಬರು ವ್ಯಕ್ತಿಗಳಲ್ಲಿ ಒಬ್ಬರಿಗೆ ಒಮಿಕ್ರಾನ್ ಸೋಂಕಿನ ಶಂಕೆಯಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ಮಾದರಿಯನ್ನು ಹೆಚ್ಚಿನ ಪರೀಕ್ಷೆಗಾಗಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಗೆ (ಐಸಿಎಂಆರ್) ರವಾನಿಸಲಾಗಿದೆ ಎಂದು ಸುಧಾಕರ್ ತಿಳಿಸಿದ್ದಾರೆ.
ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಬ್ಬರ ಮಾದರಿಗಳನ್ನೂ ಪರೀಕ್ಷಿಸಲಾಗಿದೆ. 63 ವರ್ಷದ ವ್ಯಕ್ತಿಯಲ್ಲಿ ಪತ್ತೆಯಾಗಿರುವ ವೈರಾಣುವಿನ ಪರೀಕ್ಷಾ ವರದಿ ಡೆಲ್ಟಾ ತಳಿಗಿಂತ ಭಿನ್ನವಾಗಿರುವುದು ಕಂಡುಬಂದಿದೆ. ಅವರಲ್ಲಿ ಒಮಿಕ್ರಾನ್ ತಳಿಯ ವೈರಾಣು ಇರುವ ಬಗ್ಗೆ ಖಚಿತವಾಗಿಲ್ಲ. ಈ ಕುರಿತು ಹೆಚ್ಚಿನ ಅಧ್ಯಯನಕ್ಕಾಗಿ ಮಾದರಿಯನ್ನು ಐಸಿಎಂಆರ್ಗೆ ಕಳುಹಿಸಲಾಗಿದೆ ಎಂದರು.
ಸೋಮವಾರ ಸಂಜೆಯ ವೇಳೆಗೆ ಐಸಿಎಂಆರ್ ವರದಿ ಲಭ್ಯವಾಗುವ ನಿರೀಕ್ಷೆ ಇದೆ. ಆ ಬಳಿಕ ಎಲ್ಲವೂ ಸ್ಪಷ್ಟವಾಗಲಿದೆ ಎಂದರು.
ಬೆಂಗಳೂರಿನ ರಾಜಾಜಿನಗರ ಇಎಸ್ಐ ಆಸ್ಪತ್ರೆಯಲ್ಲಿ ಕೋವಿಡ್ನಿಂದ ಮೃತರಾದ ಇಬ್ಬರ ಶವಗಳನ್ನು 15 ತಿಂಗಳಿನಿಂದ ಇರಿಸಿಕೊಂಡಿದ್ದ ವಿಷಯ ಕಾರ್ಮಿಕ ಇಲಾಖೆಯ ವ್ಯಾಪ್ತಿಗೆ ಬರುತ್ತದೆ. ಕಾರ್ಮಿಕ ಸಚಿವರನ್ನು ಸಂಪರ್ಕಿಸಿ ಈ ಬಗ್ಗೆ ಚರ್ಚಿಸಲಾಗಿದೆ. ವರದಿ ಪಡೆದು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಅಂತ್ಯಕ್ರಿಯೆ ನಡೆಸುವುದನ್ನೇ ಮರೆತ ಬಿಬಿಎಂಪಿ: 15 ತಿಂಗಳ ಬಳಿಕ ಪತ್ತೆಯಾಯ್ತು 2 ಕೋವಿಡ್ ಶವ!