newsics.com
ನವದೆಹಲಿ : ಕಿಲ್ಲರ್ ಕೊರೋನಾ ಸೋಂಕಿಗೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ (65) ಬಲಿಯಾಗಿದ್ದಾರೆ.
ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಅವರಿಗೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ರೈಲ್ವೆ ಖಾತೆ ರಾಜ್ಯ ಸಚಿವರಾಗಿ ಉತ್ತಮ ಸೇವೆ ಸಲ್ಲಿಸಿ ಜನ ಮೆಚ್ಚುಗೆಗೆ ಪಾತ್ರರಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದರು.
ಸೆ. 11ರಂದು ಅವರಿಗೆ ಸೋಂಕು ದೃಢಪಟ್ಟಿತ್ತು. ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಅಂಗಡಿ ಅವರು ಕರೊನಾ ಸೋಂಕಿಗೆ ಬಲಿಯಾದ ಕರ್ನಾಟಕದ ಎರಡನೇ ಸಂಸದರು. ಇತ್ತೀಚೆಗಷ್ಟೆ ರಾಜ್ಯಸಭಾ ಬಿಜೆಪಿ ಸದಸ್ಯ ಅಶೋಕ್ ಗಸ್ತಿ ಕೊರೋನಾ ಸೋಂಕಿನಿಂದಾಗಿ ಬೆಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.
ಸುರೇಶ್ ಅವರು ಬೆಳಗಾವಿ ಜಿಲ್ಲೆಯ ಬೆಳಗಾವಿ ತಾಲ್ಲೂಕಿನ ಕೆ.ಕೆ. ಕೊಪ್ಪಾ ಗ್ರಾಮದವರು. ಅವರು ಬೆಳಗಾವಿಯ ಎಸ್.ಎಸ್.ಎಸ್.ಸಮಿತಿ ಕಾಲೇಜ್ ಆಫ್ ಕಾಮರ್ಸ್ ನಿಂದ ಪದವಿಯನ್ನು ಪಡೆದರು. ನಂತರ ಅವರು ಬೆಳಗಾವಿಯ ಪ್ರತಿಷ್ಠಿತ ರಾಜ ಲಖಮ್ ಗೌಡ ಕಾನೂನು ಕಾಲೇಜಿನಿಂದ ಕಾನೂನು ಪದವಿ ಪಡೆದರು. ಸಾರ್ವಜನಿಕ ಜೀವನಕ್ಕೆ ಪ್ರವೇಶಿಸುವ ಮೊದಲು ಅವರು ತಮ್ಮದೇ ಆದ ಖಾಸಗಿ ವ್ಯವಹಾರವನ್ನು ನಡೆಸುತ್ತಿದ್ದರು. ಸುರೇಶ್ ಅಂಗಡಿಯವರು ಮೇ 2019 ರಲ್ಲಿ ರೈಲ್ವೆ ಖಾತೆಯ ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. 4 ಬಾರಿ ಲೋಕಸಭೆ ಸಂಸದರಾಗಿ ಸುರೇಶ್ ಅಂಗಡಿ ಆಯ್ಕೆಯಾಗಿದ್ದರು. 2004, 2009, 2014 ಮತ್ತು 2019ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಗೆದ್ದಿದ್ದರು.
ಕೇಂದ್ರ ಸಚಿವ ಸುರೇಶ ಅಂಗಡಿ ಇನ್ನಿಲ್ಲ
Follow Us